ವಾಣಿಜ್ಯ ಜಾಹಿರಾತು

ಮಂಗಳೂರು : ಮಂಗಳೂರು ನಗರದ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರದಲ್ಲಿನ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿರುತ್ತದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದಾರೆ.

ಈ ಹಂದಿ ಸಾಕಣೆ ಕೇಂದ್ರದಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಘೋಷಿಸಲಾಗಿದೆ. ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ.

ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ. ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಮತ್ತಿತರರು ಸದ್ಯ ರೋಗಪೀಡಿತ ವಲಯಕ್ಕೆ ಭೇಟಿ ನೀಡಬಾರದು. ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು. ಹಂದಿ ಸಾಕಾಣಿಕಾ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು. ಹಂದಿಗಳಿಗೆ ನೀಡಲಾಗುವ ಹೊಟೇಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭ ಚೆನ್ನಾಗಿ ಬೇಯಿಸಿ ನೀಡಬೇಕು ಎಂದು ಡಿಸಿ ಸೂಚಿಸಿದ್ದಾರೆ.

ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ. ಹಂದಿ ಪಾಲಕರು ಸೂಕ್ತ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾ ಜಾನುವಾರು ರೋಗಗಳ ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್‌ಎಂ.ಆರ್. ತಿಳಿಸಿದ್ದಾರೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.