ತೆಲಂಗಾಣ: ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಮಾಡಿದ ರ್ಯಾಗಿಂಗ್ ನಿಂದ ಆತ್ಮಹತ್ಯೆಗೆ ಯತ್ನಿಗೆ ಆಸ್ಪತ್ರೆಗೆ ದಾಖಲಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಮೃತ ಪ್ರೀತಿ ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಅನಸ್ತೇಶಿಯಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದರು. ಆದರೆ ಕಳೆದ ಮೂರು ತಿಂಗಳಿನಿಂದ ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ಎಂಡಿ ಸೈಫ್ ಎಂಬಾತ ಪ್ರೀತಿಗೆ ಕಿರುಕುಳ ನೀಡುತ್ತಿದ್ದ ಎಂದು ಹೇಳಲಾಗಿದ್ದು, ಇದೇ ಕಾರಣಕ್ಕೆ ಪ್ರೀತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.
ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೀತಿಯನ್ನು ಆಕೆಯ ಸಹಪಾಠಿಗಳು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರೀತಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.
ವೈದ್ಯ ವಿದ್ಯಾರ್ಥಿನಿ ಸಾವಿನ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆದಿದ್ದು ಈ ವೇಎ ಆಸ್ಪತ್ರೆಯಲ್ಲಿ ಲಘು ಉದ್ವಿಗ್ನತೆ ಉಂಟಾಗಿದೆ. ಭಾನುವಾರ ಸಂಜೆಯಿಂದಲೇ ವಿವಿಧ ಬುಡಕಟ್ಟು ಸಂಘಟನೆಗಳು ಆಸ್ಪತ್ರೆ ಬಳಿ ಜಮಾಯಿಸಿ ಡಾ.ಪ್ರೀತಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿವೆ.
ಪ್ರೀತಿ ನಿಧನಕ್ಕೆ ಆರೋಗ್ಯ ಸಚಿವ ಟಿ ಹರೀಶ್ ರಾವ್ ಸಂತಾಪ ಸೂಚಿಸಿದ್ದು ರಾಜ್ಯ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಪ್ರೀತಿ ಆರೋಗ್ಯವಾಗಿ ಮರಳಬೇಕೆಂದು ನಾವು ಆಶಿಸಿದ್ದೆವು ಆದರೆ ಅವಳು ಮತ್ತೆಂದು ಬಾರದ ಲೋಕಕ್ಕೆ ತೆರಳಿದ್ದಾಳೆ. ರಾಜ್ಯ ಸರ್ಕಾರ ಅವರ ಕುಟುಂಬದ ಬೆಂಬಲಕ್ಕೆ ನಿಂತಿದೆ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.