ಮಂಗಳೂರು: ‘ಸುರತ್ಕಲ್ ಸಮೀಪದ ಕಾಟಿಪಳ್ಳ ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಕೊಲೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದೇವೆ. 14 ದಿನ ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಬಂಧಿತ ಮೂವರಲ್ಲಿ ಇಬ್ಬರು ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದು, ಮತ್ತೊಬ್ಬ ವ್ಯಕ್ತಿ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ. ಆರೋಪಿಗಳ ಪೂರ್ಣ ಮಾಹಿತಿಯನ್ನು ಸದ್ಯಕ್ಕೆ ಬಹಿರಂಗಪಡಿಸಲು ಸಾಧ್ಯವಿಲ್ಲ.
ನಿನ್ನೆ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದೇವೆ ಎಂದರು.
‘ಕೊಲೆಗೆ ಕಾರಣ ಏನು ಎಂಬುವುದನ್ನು ತನಿಖೆ ಪೂರ್ಣಗೊಂಡ ಬಳಿಕ ಬಹಿರಂಗಪಡಿಸುತ್ತೇವೆ. ‘ಜಲೀಲ್ ಕುಟುಂಬಸ್ಥರು ಸೇರಿದಂತೆ ಹಲವರ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ್ದೇವೆ. ಎಂದು ಕಮಿಷನರ್ ಹೇಳಿದ್ದಾರೆ.
ಸದ್ಯ ಮೂವರನ್ನು ಮಾತ್ರ ಬಂಧಿಸಲಾಗಿದೆ. ಬಂಧಿತ ಮೂವರಲ್ಲಿ ಇಬ್ಬರು 2021ರಲ್ಲಿ ನಡೆದ ಕೊಲೆ ಯತ್ನ ಪ್ರಕರಣವೂ ಸೇರಿದಂತೆ ಈ ಹಿಂದೆ ಹಲವು ಪ್ರಕರಣಗಳ ಆರೋಪಿಗಳಾಗಿದ್ದರು. ಜಲೀಲ್ ಕೊಲೆ ಪ್ರಕರಣದಲ್ಲಿ ಮಹಿಳೆಯೂ ಸೇರಿ 12 ಜನರನ್ನು ವಶಕ್ಕೆ ಪಡೆದಿದ್ದೆವು’ ಎಂದು ಅವರು ಹೇಳಿದರು.