ಉಡುಪಿ : 13 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ಕುಂದಾಪುರ ತಾಲೂಕಿನ ತಲ್ಲೂರಿನಲ್ಲಿ ನಡೆದಿದೆ.
ಕುಂದಾಪುರದಲ್ಲಿ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ ಮೃತಪಟ್ಟ ಬಾಲಕಿ.
ಮನೆಯಲ್ಲಿ ಓದುತ್ತಿದ್ದ ವೇಳೆ ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಆಕೆ ಕೊನೆಯುಸಿರೆಳೆದಿದ್ದಾಳೆಂದು ತಿಳಿದುಬಂದಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಅನುಶ್ರೀ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ನಿರೀಕ್ಷಿಸಲಾಗುತ್ತಿದೆ. ಅನುಶ್ರೀ ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದು, ಪಠ್ಯ ಹಾಗೂ ಪಠ್ಯತರ ಚಟುವಟಿಕೆಗಳಲ್ಲಿ ಚುರುಕಾಗಿದ್ದಳು.
ಅನುಶ್ರೀಯ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಗುರುವಾರ ರಾತ್ರಿ ಭಾರತಿಯವರ ತಾಯಿಯ ಮನೆ ಪರಿಸರದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ. ಬಾಲಕಿಯ ಸಾವಿಗೆ ಬೈಂದೂರು ಶಾಸಕ ಗೋಪಾಲ ಪೂಜಾರಿ ಮತ್ತಿತರರು ಸಂತಾಪ ಸೂಚಿಸಿದ್ದಾರೆ.